ಪ್ರವಾಹ ಎದುರಿಸಲು ಸನ್ನದ್ಧರಾಗಲು ಅಧಿಕಾರಿಗಳಿಗೆ ಸೂಚನೆ


ಬಾಗಲಕೋಟೆ: ಉತ್ತರ ಕರ್ನಾಟಕಕ್ಕೆ ಮತ್ತೆ ಪ್ರವಾಹ ಅಪ್ಪಳಿಸುವ ಸಾಧ್ಯತೆ ಇದೆ.‌ ಮಹಾರಾಷ್ಟ್ರದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಕೃಷ್ಣ, ಘಟಪ್ರಭ ಹಾಗೂ ಮಲಪ್ರಭ ನದಿಗಳಿಗೆ ಹೆಚ್ಚಿನ‌ ಒಳ‌ ಹರಿವು ಬರಬಹುದು. ಇದರಿಂದ ಪ್ರವಾಹ ಸಂಭವಿಸಬಹುದು. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರವಾಹ ಎದುರಿಸಲು ಅಧಿಕಾರಿಗಳು ಸನ್ನದ್ದರಾಗಬೇಕೆಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ (Govidna Karajola) ಸೂಚಿಸಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಪ್ರವಾಹ (Flood) ನಿಯಂತ್ರಣ ಮತ್ತು ಕೋವಿಡ್ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಗೋವಿಂದ ಕಾರಜೋಳ ಅವರು, ಪ್ರವಾಹಕ್ಕೆ ಒಳಗಾಗುವ ಗ್ರಾಮಗಳಿಗೆ ತೆರಳಿ ಮುನ್ನಚ್ಚರಿಕೆ ಕ್ರಮಕೈಗೊಳ್ಳಬೇಕು. ಆಯಾ ತಾಲೂಕಿನ ತಹಶೀಲ್ದಾರರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪ್ರವಾಹ ನಿಯಂತ್ರಿಸಲು ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು. ತಾಲೂಕಾ ಮಟ್ಟದಲ್ಲಿ ಪ್ರವಾಹ ಪೀಡಿತ ಗ್ರಾಮಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು. ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಧಿಕಾರಿಗಳಲ್ಲಿ ಯಾವುದೇ ಅನುದಾನ ಕೊರತೆ ಇರುವುದಿಲ್ಲ. ಎನ್.ಡಿಆರ್ ಎಫ್, ಎಸ್‍ಡಿಆರ್ ಎಪ್‍ನಲ್ಲಿ 7 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. 2 ಹೊಸ ರೆಸ್ಕೋ ಬೋಟ್‍ಗಳನ್ನು ಖರೀದಿಸಲು ಕ್ರಮವಹಿಸಲಾಗುತ್ತಿದೆ. ತಾಲೂಕುವಾರು ನುರಿತ ಈಜುಗಾರರ ಪಟ್ಟಿ ಮಾಡಿ. ಲೈಪ್, ಸೇವಿಂಗ್ ಜಾಕೆಟ್, ಟಾರ್ಚ, ಹೆಲ್ಮೇಟ್ ಮುಂತಾದ ಅವಶ್ಯಕ ಸಾಮಗ್ರಿಗಳ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಕ್ರಮವಹಿಸಲಾಗುತ್ತಿದೆ ಎಂದರು. ಬೆಳೆ ಹಾನಿ ಸಮೀಕ್ಷೆಗೆ ತಂಡ ರಚನೆ, ಮನೆ ಹಾನಿ ಕುರಿತು ತಂಡ ರಚನೆ, ಮೇವು ಪೂರೈಕೆ, ಸಹಾಯವಾಣಿ ಕೇಂದ್ರ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಸ್ಥಾಪಿಸಲು ಸೂಚಿಸಿದರು. ಜನರ ಆರೋಗ್ಯ, ಜಾನುವಾರು ಆರೋಗ್ಯಕ್ಕೆ ಅಗತ್ಯ ಔಷಧಿಗಳ ದಾಸ್ತಾನು, ಮೇವು ಹಾಗೂ ಮುಂತಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಕುಡಿಯುವ ನೀರು, ಮೂಲಭೂತ ಸೌಲಭ್ಯ, ಗಂಜಿ ಕೇಂದ್ರ, ಗೋಶಾಲೆ ಕುರಿತು ಕ್ರಮವಹಿಸಲು ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 27 ನಾವೆಗಳಿದ್ದು, ಈ ಪೈಕಿ 19 ಸುಸ್ಥಿತಿಯಲ್ಲಿವೆ. ಅವುಗಳನ್ನು ಸಿದ್ದತೆಯಲ್ಲಿ ಇಟ್ಟುಕೊಳ್ಳಲು ಸೂಚಿಸಿದರು. ಹಿಪ್ಪರಗಿ ಜಲಾಶಯದಲ್ಲಿ ಕೃಷ್ಣಾ ನದಿಯ ಗರಿಷ್ಠ ಮಟ್ಟ 524.87 ಮೀಟರ ಇದ್ದು, ಇಂದಿನ ಮಟ್ಟ 520.90 ಮೀಟರ್ ಇದೆ. ಒಳ ಹರಿವು 65000 ಕ್ಯೂಸೆಕ್ಸ್ ಇದ್ದು, ಹೊರ ಹರಿವು 64000 ಕ್ಯೂಸೆಕ್ಸ್ ಇದೆ. ಆಲಮಟ್ಟಿ ಜಲಾಶಯದಲ್ಲಿ ಗರಿಷ್ಟ 519.60 ಮೀಟರ ಇದ್ದು, ಇಂದಿನ ಮಟ್ಟ 517 ಮೀಟರ್ ಇದೆ. ಒಳ ಹರಿವು 72030 ಕ್ಯೂಸೆಕ್ಸ್ ಇದ್ದು, ಹೊರ ಹರಿವು 16545 ಕ್ಯೂಸೆಕ್ಸ್ ಇದೆ. ಹಿಡಕಲ್ ಜಲಾಶಯದಲ್ಲಿ ಫಟಪ್ರಭಾ ನದಿಯ ಗರಿಷ್ಠ ಮಟ್ಟ 2175 ಮೀಟರ ಇದ್ದು, ಇಂದಿನ ಮಟ್ಟ 2120.33 ಮೀಟರ್ ಇದೆ. ಒಳಹರಿವು 17984 ಕ್ಯೂಸೆಕ್ಸ್ ಇದ್ದು, ಹೊರ ಹರಿವು 103 ಕ್ಯೂಸೆಕ್ಸ್ ಇದೆ. ಅದೇ ರೀತಿ ನವೀಲು ತೀರ್ಥ ಜಲಾಶಯದಲ್ಲಿ ಮಲಪ್ರಭಾ ನದಿಯ ಗರಿಷ್ಠ ಮಟ್ಟ 2079.50 ಮೀಟರ ಇದ್ದು, ಇಂದಿನ ಮಟ್ಟ 13.896 ಮೀಟರ ಇದೆ. ಒಳ ಹರಿವು 19095 ಕ್ಯೂಸೆಕ್ಸ್ ಇದ್ದು, ಹೊರ ಹರಿವು 1364 ಕ್ಯೂಸೆಕ್ಸ್ ಇದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿಗಳು ಪ್ರವಾಹ ಎದುರಿಸಲು ಮಾಡಿಕೊಂಡಿರುವ ಸಿದ್ದತೆಗಳ ಬಗ್ಗೆ ವಿವರವಾಗಿ ಸಭೆಗೆ ತಿಳಿಸಿದರು. ಸಭೆಯಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಡಾ. ವೀರಣ್ಣ ಚರಂತಿಮಠ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಜಿ.ಪಂ ಸಿಇಓ ಟಿ. ಭೂಬಾಲನ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿಗಳಾದ ಎಂ.ಗಂಗಪ್ಪ, ಸಿದ್ದು ಹುಲ್ಲೊಳ್ಳಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನವೀನ ಹಳೆಯದು